ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದಲ್ಲಿ ಮನೆಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಗ್ರಾಮದ ನಿವಾಸಿ ಮಂಜುನಾಥ್ ಅವರಿಗೆ ಸೇರಿದ ಮನೆ ಶಾರ್ಟ್ ಸರ್ಕ್ಯೂಟ್ನಿಂದ ತೀವ್ರ ಬೆಂಕಿಗೆ ಆಹುತಿಯಾಗಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಇಲ್ಲದ ಕಾರಣ ದೊಡ್ಡ ಪ್ರಾಣಾಪಾಯ ತಪ್ಪಿದರೂ, ಅನೇಕ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಮಂಜುನಾಥ್ ಅವರ ಮಗನ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಕ್ಷಣವೇ ಬೆಂಕಿ ವ್ಯಾಪಿಸಿ ಸಂಪೂರ್ಣ ಮನೆಯನ್ನೇ ಆವರಿಸಿತು. ಸುಮಾರು ₹25 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಇತರ ಅಮೂಲ್ಯ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಜುನಾಥ್ ಕುಟುಂಬ ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದು, ಈ ಕುರಿತು ಸರ್ಕಾರದಿಂದ ಸಹಾಯ ನೀಡಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.