ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ತಿಳಿಸಿದರು.
ಅವರು ಮಂಗಳವಾರ ಕಾರವಾರದ ಅಜ್ಜಿ ಓಷಿಯನ್ ಹೋಟೆಲ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಸಂಘಟಿತ ವಲಯದ ಕಾರ್ಮಿಕರು ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲರಾಗಿದ್ದು, ಸಂಘಟಿತ ಕಾರ್ಮಿಕರಿಗೆ ದೊರೆಯುವ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಇವರಿಗೆ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈ ಮಂಡಳಿಗೆ ಹೆಚ್ಚಿನ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ನಿರ್ದಿಷ್ಟ ಮೊತ್ತವನ್ನು ವರ್ಗಾಯಿಸುವ ಕುರಿತು ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡಿಕೊಂಡು, ಈ ವರ್ಗದ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗರಿಷ್ಠ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈಗಾಗಲೇ ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಇ ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗಾಗಿ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿರುವ ಕಾರ್ಮಿಕರ ಸುಂಕ ಅಧಿನಿಯಮ, ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಅಧಿನಿಯಮ ಮತ್ತು ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ರಾಜ್ಯದಲ್ಲಿ ಕಾರ್ಮಿಕರ ಮಕ್ಕಳಿಗಾಗಿ 6 ರಿಂದ 12 ತರಗತಿಯವರಿಗೆ ಉಚಿತ ಶಿಕ್ಷಣ ನಿಡುವ ಶಾಲೆಗಳನ್ನು ತೆರೆಯಲಾಗುತ್ತಿದ್ದು, ಪ್ರತೀ ಜಿಲ್ಲೆಗೊಂದು ಈ ಶಾಲೆಗಳನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ ಸಚಿವರು, ಕನಿಷ್ಠ ವೇತನ ಪಾವತಿಯನ್ನು ಕಡ್ಡಾಯಗೊಳಿಸಿದ್ದು ಈ ಬಗ್ಗೆ ದೂರುಗಳಿದ್ದಲ್ಲಿ ಲಿಖಿತವಾಗಿ ನೇರವಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು, ರಾಜ್ಯದಲ್ಲಿನ ಸರ್ಕಾರಿ ಇಲಾಖೆಗಳಲ್ಲಿನ ಹೊರಗುತ್ತಿಗೆ ನೌಕರರ ನೇಮಕಾತಿಗಾಗಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿಗಳನ್ನು ರಚಿಸಲಾಗುತ್ತಿದೆ, ನಿರ್ದಿಷ್ಟ ಅವಧಿಗೆ ಸೇವೆ ಸಲ್ಲಿಸಿದ ನೌಕರರರಿಗೆ ಗ್ಯಾಚ್ಯುಯಿಟಿ ಮತ್ತು ಕಡ್ಡಾಯವಾಗಿ ವಿಮೆ ಮಾಡಿಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದ್ದು, ರಾಜ್ಯದಲ್ಲಿ ಕಾರ್ಮಿಕರ ಅಭಿವೃಧ್ದಿಗೆ ಪೂರಕವಾದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾತನಾಡಿ, ಕಾರ್ಮಿಕ ಇಲಾಖೆ ಈ ಮೊದಲು ಕಟ್ಟಡ ಕಾರ್ಮಿಕರಿಗೆ ಮಾತ್ರ ಎಂಬಂತೆ ಇದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಣ್ಣ ಸಣ್ಣ ವೃತ್ತಿಗಳನ್ನು ಮಾಡುತ್ತಿದ್ದ 90 ಕ್ಕೂ ಅಧಿಕ ವರ್ಗದ ಕಾರ್ಮಿಕರಿಗೆ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಸಾಮಾನ್ಯರು, ಬಡವರು ಮತ್ತು ಕಾರ್ಮಿಕರ ಪರವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಜನಪರ ಯೋಜನೆಗಳಿಗಾಗಿ ರಾಜ್ಯದಲ್ಲಿ ಹಣಕಾಸಿನ ಯಾವುದೇ ಕೊರತೆ ಇಲ್ಲ ಎಂದರು.
ಶಾಸಕ ಸತೀಶ್ ಸೈಲ್ ಮಾತನಾಡಿ, ಕಾರವಾರದಲ್ಲಿ ಕೈಗಾ, ಸೀಬರ್ಡ್ ಸೇರಿದಂತೆ ವಿವಿದೆಡೆಗಳಲ್ಲಿ 10,000 ಕ್ಕೂ ಅಧಿಕ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಗೆ ಪ್ರತ್ಯೇಕ ಇ.ಎಸ್.ಐ ಆಸ್ಪತ್ರೆ ಮಂಜೂರು ಮಾಡುವಂತೆ, ಕಾರ್ಮಿಕರ ಮಕ್ಕಳಿಗಾಗಿ 6 ರಿಂದ 12 ನೇ ತರಗತಿ ವರೆಗಿನ ಉಚಿತ ಶಿಕ್ಷಣಕ್ಕಾಗಿ ಶಾಲೆಯನ್ನು ತೆರೆಯುವಂತೆ ಮನವಿ ಮಾಡಿದರು.
ಕಾರವಾರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ತಾವು ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಪ್ರಸ್ತುತ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಶಾಸಕರಿಗೆ ಕ್ಷೇತ್ರದ ಅಭಿವೃಧ್ದಿಗೆ ನೀಡುವ 50 ಕೋಟಿ ರೂಗಳ ಸಂಪೂರ್ಣ ಅನುದಾನವನ್ನು ತಾನು ಆಸ್ಪತ್ರೆ ನಿರ್ಮಾಣಕ್ಕೆ ನೀಡಲಿದ್ದು, ಜಿಲ್ಲೆಯ ಇತರೇ ಶಾಸಕರು ತಮ್ಮ ಅನುದಾನದಲ್ಲಿ ಶೇ.50 ರಷ್ಟು ನೀಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇರಳದ ಮಂಜೇಶ್ವರ ಶಾಸಕ ಅಶ್ರಫ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವೈ ಹಳೇಮನಿ, ಅಸಂಘಟಿತ ಕಾರ್ಮಿಕ ಮಂಡಳಿಯ ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ್, ಬೆಳಗಾವಿ ವಿಭಾಗದ ಉಪ ಕಾರ್ಮಿಕ ಆಯುಕ್ತ ನಾಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.