
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಯಿಂದ ನಡೆಸಲಾಗುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ ಪತ್ರ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಫಲವತ್ತಾದ ಕೃಷಿ ಜಮೀನನ್ನು ಕರ್ನಾಟಕ ಇಂಡಸ್ಟ್ರಿಯಲ್ ಏರಿಯ ಡೆವಲಪೈಂಟ್ ಬೋರ್ಡ್ (ಕೆ.ಐ.ಎ.ಡಿ.ಬಿ.) ವತಿಯಿಂದ ಸ್ವಾಧೀನ ಪಡಿಸಿಕೊಳ್ಳುವ ಪಕ್ರಿಯೆ ಕೈಗೊಳ್ಳಲಾಗಿದೆ.
ತಾವುಗಳು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಇದೇ ಹೋಬಳಿಯ ಜಮೀನುಗಳನ್ನು ಹುಲಿಕುಂಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ರೈತರ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಸ್ತಾವನೆ ಪ್ರಕ್ರಿಯೆಯನ್ನು ಕೈ ಬಿಟ್ಟು ಬದಲಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವಂತೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ರವರಿಗೆ ಮನವಿ ಮಾಡಿರುತ್ತೀರ.
ಈ ಜಮೀನುಗಳು ನೀರಾವರಿ ಜಮೀನು, ಜೊತೆಗೆ ಫಲವತ್ತಾದ ಭೂಮಿಯಾಗಿದ್ದು, ರೈತರು ಅಡಿಕೆ ಮತ್ತು ಬಾಳೆ ಹಾಗೂ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ, ಜಮೀನನ್ನು ಸಮೀಕ್ಷೆ ಮಾಡಿದ ಅಧಿಕಾರಿಗಳು ಸರ್ವೇ ವರದಿಯ ಮಾಹಿತಿ ನೀಡುವಾಗ ಖಾಲಿ ಜಾಗ ಎಂದು ತಪ್ಪು ಮಾಹಿತಿಯನ್ನು ನೀಡಿದ್ದಾರೆ.
ಈ ಭೂಮಿಗಳು ಸಾವಿರಾರು ರೈತರ ಜೀವನೋಪಾಯಕ್ಕೆ ಆಧಾರವಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯಿಂದ ಅವರು ತಮ್ಮ ಜೀವನಾಧಾರ ಕಳೆದುಕೊಳ್ಳುವ ಗಂಭೀರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಕ್ರಮವು ರೈತರ ಬದುಕಿನ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ. ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ರೈತರು ಪ್ರತಿಭಟನೆ ಕೈಗೊಂಡಿದ್ದಾರೆ.
ಈ ಹಿನ್ನಲೆಯಲ್ಲಿ, ಸ್ಥಳೀಯ ರೈತರ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಹಿತಾಸಕ್ತಿಯನ್ನು ಪರಿಗಣಿಸಿ, ಜಮೀನನ್ನು ಸಮೀಕ್ಷೆ ಮಾಡಿ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಹಾಗೂ 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಿ. ಮುಂದಿನ ಕ್ರಮಗಳನ್ನು ಕೈಬಿಡುವಂತೆ ಹಾಗೂ ಈ ವಿಷಯವನ್ನು ಅತ್ಯಂತ ತುರ್ತು ಹಾಗೂ ಗಂಭೀರ ವಿಷಯ ಎಂದು ಪರಿಗಣಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.