ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ

ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಪೂರ್ವ ಕಿಂಕೋ ನೌಕರರ ವೇತನವನ್ನು ಶೇ.12.50ರಷ್ಟು ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದ ಪ್ರಕಾರ, ದಿನಾಂಕ 31.03.2025ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.12.50ರಷ್ಟು ಹೆಚ್ಚಿಸಿ, ಉನ್ನತ ವೇತನ ಶ್ರೇಣಿ ಹಾಗೂ ಮಧ್ಯಂತರ (Selection Grade) ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗುವುದು. ಈ ಪರಿಷ್ಕರಣೆ 01.04.2025ರಿಂದ ಜಾರಿಯಾಗಲಿದ್ದು, 01.07.2026ರ ಮಾಹೆಯ ವೇತನದಲ್ಲಿ ಅನುಷ್ಠಾನಗೊಳ್ಳಲಿದೆ.

ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು 01.04.2025ರಿಂದ 30.06.2026ರ ಅವಧಿಗೆ ಸಂಬಂಧಿಸಿದಂತೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಂತ ಹಂತವಾಗಿ ಪಾವತಿಸಲಾಗುವುದು. ಸಾರಿಗೆ ನಿಗಮಗಳು ಕಳೆದ ಹಲವು ವರ್ಷಗಳಿಂದ ನಷ್ಟ ಅನುಭವಿಸುತ್ತಿರುವುದರಿಂದ, ಪ್ರಸ್ತುತ ರೂ.7130.80 ಕೋಟಿ ಹೊಣೆಗಾರಿಕೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಹಿಂಬಾಕಿ ಪಾವತಿ ಹಂತ ಹಂತವಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಹೊರಡಿಸಿದ್ದು, ಪ್ರಧಾನ ಮಹಾಲೇಖಪಾಲರು ಹಾಗೂ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ.

ಈ ನಿರ್ಧಾರದಿಂದ ಸಾರಿಗೆ ನಿಗಮಗಳ ಸಾವಿರಾರು ನೌಕರರು ಮತ್ತು ಅಧಿಕಾರಿಗಳಿಗೆ ಆರ್ಥಿಕ ನೆರವು ದೊರೆಯಲಿದ್ದು, ನಾಲ್ಕು ವರ್ಷದ ಅವಧಿಗೆ (01.04.2025ರಿಂದ 31.03.2029ರವರೆಗೆ) ವೇತನ ಪರಿಷ್ಕರಣೆ ಜಾರಿಯಲ್ಲಿರಲಿದೆ.

Leave a Reply

Your email address will not be published. Required fields are marked *

error: Content is protected !!