ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಸೇರಿದಂತೆ ಐದು ಗ್ರಾಮಗಳ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದಕ್ಕೆ ರೈತರು ತೀವ್ರ ಆಕ್ರೋಶ ಹೊರಹಾಕಿದರು.

ದೊಡ್ಡಬೆಳವಂಗಲ ಹೋರಾಟ ಕೇಂದ್ರದಿಂದ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದವರೆಗೆ ನಡೆದ ರ್ಯಾಲಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಲ್ಲಿ ರೈತರು ಭಾಗವಹಿಸಿ ಪ್ರತಿಭಟನೆ ನಡೆಸಿದರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ರೈತರ ಹೋರಾಟಕ್ಕೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ವಿಶೇಷವಾಗಿ ಚನ್ನರಾಯಪಟ್ಟಣ ಭೂ ಸ್ವಾಧೀನ ಹೋರಾಟ ಸಮಿತಿಯೂ ಪ್ರತಿಭಟನೆಯಲ್ಲಿ ಭಾಗವಹಿಸಿತ್ತು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಾಜ್ ಮುನಿರಾಜು ಹಾಗೂ ಮಾಜಿ ಶಾಸಕ ವೆಂಕಟರಮಣಯ್ಯ ಭಾಗವಹಿಸಿ ರೈತರ ಪರವಾಗಿ ಧ್ವನಿ ಎತ್ತಿದರು.

“ಫಲವತ್ತಾದ ಕೃಷಿ ಭೂಮಿ ನಮ್ಮ ಜೀವನಾಧಾರ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಕೂಡಲೇ ಹಿಂದೆ ಸರಿಯಬೇಕು. ನಮ್ಮ ಭೂಮಿ ನಮಗೇ ಉಳಿಯಬೇಕು. ಒಂದು ವೇಳೆ ಸರ್ಕಾರ ಈ ಪ್ರಕ್ರಿಯೆಯನ್ನು ಮುಂದುವರಿಸಿದರೆ ತಕ್ಕ ಪಾಠ ಕಲಿಸುತ್ತೇವೆ” ಎಂದು ರೈತರು ಎಚ್ಚರಿಕೆ ನೀಡಿದರು.

ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!