
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ ಪಕ್ಷದ ಕಾರ್ಯಕರ್ತರು ಮಂಗಳವಾರ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ತಿಂಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿದರು. ಕೇವಲ 11 ದಿನಗಳ ಅಂತರದಲ್ಲಿ ನಾಲ್ಕು ಬಾರಿ ಇಂಧನ ದರ ಏರಿಕೆಯಾಗಿರುವುದು ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ತಂದಿದ್ದು, ಜನರ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೇ ತಿಂಗಳಲ್ಲಿ ಕಚ್ಚಾ ತೈಲದ ಬೆಲೆ ಶೇ.20ರಷ್ಟು ಇಳಿಕೆಯಾಗಿದ್ದರೂ ಅದರ ಲಾಭವನ್ನು ದೇಶದ ಜನರಿಗೆ ತಲುಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಬಡವರು, ದೀನದಲಿತರು, ಅಲ್ಪಸಂಖ್ಯಾತರು, ಕೂಲಿಕಾರ್ಮಿಕರು, ರೈತರು, ನೇಕಾರರು, ಶ್ರಮಿಕರು ಹಾಗೂ ಮಧ್ಯಮ ವರ್ಗದ ಜನರು ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಪಕ್ಷದ ಮುಖಂಡ ಡಿ.ಪಿ. ಆಂಜನೇಯ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ಪರಿಣಾಮವಾಗಿ ಇಂಧನ ದರಗಳು ನಿರಂತರವಾಗಿ ಏರಿಕೆಯಾಗುತ್ತಿವೆ ಎಂದು ಆರೋಪಿಸಿದ ಅವರು ಉದ್ಯೋಗ ಸೃಷ್ಟಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ರೈತರ ಕಲ್ಯಾಣದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದು, ಕಾರ್ಮಿಕರು ತಮ್ಮ ವೇತನ ಮತ್ತು ಹಕ್ಕುಗಳಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರವನ್ನು ಜನರು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡರಾದ ವೆಂಕಟೇಶ್, ಕುಮಾರ್, ರಮೇಶ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.