ಖಾತೆ ಕಗ್ಗಂಟಿನ ನಡುವೆ ದೆಹಲಿಯತ್ತ ಸಿಎಂ ಡಿ.ಕೆ, ಡಿಸಿಎಂ ಪರಂ: ಖಾತೆ ಬದಲಾವಣೆಗೆ ಪಟ್ಟು ಬಿಡದ ಸಚಿವ ಕೆಎಚ್ ಎಂ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಹಾಗೂ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚಟುವಟಿಕೆಗಳ ನಡುವೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಸಿಎಂ ಜೊತೆಗೆ ಹಲವು ಸಚಿವಾಕಾಂಕ್ಷಿಗಳು ಹಾಗೂ ಶಾಸಕರು ಕೂಡ ದೆಹಲಿಯತ್ತ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಖಾತೆ ಹಂಚಿಕೆ ಕುರಿತ ಅಸಮಾಧಾನ ಹಾಗೂ ಸಚಿವ ಸಂಪುಟದ ಎರಡನೇ ಪಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೇ ವೇಳೆ ಖಾತೆ ಬದಲಾವಣೆಗೆ ಪಟ್ಟು ಬಿಡದ ಸಚಿವ ಕೆ.ಎಚ್ ಮುನಿಯಪ್ಪ ತಮ್ಮ ಲಾಬಿ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿರುವ ಮುನಿಯಪ್ಪ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲೂ ವಿಮಾನ ನಿಲ್ದಾಣದಲ್ಲೇ ಮಾತುಕತೆ ನಡೆಸಿದ್ದರು.

ಇಂದು ಕೂಡ ಸಿಎಂ ದೆಹಲಿಗೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮುನಿಯಪ್ಪ ಅವರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.

ಖಾತೆ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡುವಂತೆ ಸಿಎಂಗೆ ಅವರು ಒತ್ತಾಯಿಸಿರುವ ಸಾಧ್ಯತೆ ಇದೆ. ಬಳಿಕ ಸಿಎಂ ಅವರನ್ನು ಬೀಳ್ಕೊಟ್ಟು ಮುನಿಯಪ್ಪ ಬೆಂಗಳೂರಿನತ್ತ ಮರಳಿದರು.

ರಾಜ್ಯದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ, ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಮರುಹಂಚಿಕೆ ಕುರಿತು ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಸಭೆಗಳತ್ತ ಕಾಂಗ್ರೆಸ್ ವಲಯದ ಗಮನ ಕೇಂದ್ರೀಕೃತವಾಗಿದೆ.

Leave a Reply

Your email address will not be published. Required fields are marked *

error: Content is protected !!