
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ ಅಂಗೀಕರಿಸಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ನಿಯಮ 40ರ ಅನ್ವಯ ಸುಮಿತ್ರಾ ಕೆ. ಆನಂದ್ ಅವರು ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷೆಯಾಗಿ ಮುಂದುವರಿದು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ, ಯಾವುದೇ ಒತ್ತಡಕ್ಕೆ ಮಣಿಯದೆ ಸ್ವಇಚ್ಛೆಯಿಂದ ಜೂನ್ 1ರಂದು ರಾಜೀನಾಮೆ ಸಲ್ಲಿಸಿದ್ದರು.
ಅಧಿನಿಯಮದ ನಿಯಮ 40(2)ರ ಪ್ರಕಾರ ರಾಜೀನಾಮೆ ಸಲ್ಲಿಸಿದ ದಿನಾಂಕದಿಂದ ಹತ್ತು ದಿನಗಳ ಅವಧಿಯೊಳಗೆ ಅದನ್ನು ಹಿಂಪಡೆಯುವ ಅವಕಾಶವಿದ್ದು, ಜೂನ್ 10ರೊಳಗೆ ಸುಮಿತ್ರಾ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯದಿರುವುದು ದಾಖಲಾಗಿದೆ. ಅಲ್ಲದೆ, ರಾಜೀನಾಮೆ ಪತ್ರದಲ್ಲಿರುವ ಸಹಿಯನ್ನು ನಗರಸಭೆ ಪೌರಾಯುಕ್ತರು ದೃಢೀಕರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾನೂನುಬದ್ಧ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಲಾದ ರಾಜೀನಾಮೆಯನ್ನು ಅಂಗೀಕರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರಾಜೀನಾಮೆ ಅಂಗೀಕಾರದೊಂದಿಗೆ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತು ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ಮುಖ್ಯವಾಗಿ ಇಂದು (ಜೂ.17ರ ಬುಧವಾರ) ನಗರಸಭೆ ಸರ್ವ ಸದಸ್ಯರ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕರೆದಿರುವುದು ವಿಪರ್ಯಾಸವಾಗಿದೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ.