
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಕಳವುಗೊಂಡ ಚಿನ್ನದ ಸರ ಸೇರಿದಂತೆ ಒಟ್ಟು ₹2.96 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.
ಜೂನ್ 22ರಂದು ಉಮೇಶ್ ಕೆ ಅವರು ನೀಡಿದ ದೂರಿನ ಮೇರೆಗೆ, ಅವರ ಕತ್ತಿನಲ್ಲಿದ್ದ 14 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳರು ಕಿತ್ತುಕೊಂಡಿರುವ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಜೂನ್ 22ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಸಂಬಂಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚಂದ್ರಕಾಂತ್ ಎಂ.ವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ವರ ಪ್ರಸನ್ನ ಹಾಗೂ ಲಕ್ಷ್ಮೀನಾರಾಯಣ್ ಎ.ವಿ, ಮತ್ತು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿತ್ತು.
ತನಿಖೆಯ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಪಾಲನ ಜೋಗಿಹಳ್ಳಿ ಗ್ರಾಮದ ನಿವಾಸಿಗಳಾಗಿದ ಆಕಾಶ್ (20) ಹಾಗೂ ಸುಮನ್ (20) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ 14 ಗ್ರಾಂ ತೂಕದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಡಿಯೋ ಬೈಕ್ ಸೇರಿದಂತೆ ಒಟ್ಟು ₹2.96 ಲಕ್ಷ ಮೌಲ್ಯದ ಮಾಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡದ ಸಿಬ್ಬಂದಿ ಪಿಎಸ್ಐ ನಾರಾಯಣಸ್ವಾಮಿ, ಪ್ರೊಬೇಷನರಿ ಪಿಎಸ್ಐ ಸುಮಂತ್, ಹೆಡ್ ಕಾನ್ಸ್ಟೇಬಲ್ಗಳಾದ ರಂಗನಾಥ್, ಸುನಿಲ್ ಭಾಸಗಿ, ಹರೀಶ್, ಮಂಜುನಾಥ್, ಚಂದ್ರಶೇಖರ್, ಎಎಚ್ಸಿ ನಟರಾಜು, ಸಚಿನ್ ಉಪ್ಪಾರ ಹಾಗೂ ತಾಂತ್ರಿಕ ಸಿಬ್ಬಂದಿ ಪ್ರಮುಖ ಪಾತ್ರವಹಿಸಿದ್ದಾರೆ.
ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.