ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತರನ್ನು ಚನ್ನಪಟ್ಟಣ ಮೂಲದವರಾದ ಶ್ವೇತಾ (38), ಚೈತ್ರಾ (20), ಪ್ರಿಯಾಂಕಾ (28), ವಿಜಯಮ್ಮ (50) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ.

ಕುಟುಂಬದ ಸದಸ್ಯರು ಬೆಂಗಳೂರಿನಲ್ಲಿ ನೆಲೆಸಿದ್ದು, ಭಾನುವಾರ ಬಾಡಿಗೆ ಕಾರಿನಲ್ಲಿ ದೇವರ ದರ್ಶನಕ್ಕಾಗಿ ಹೊರಟಿದ್ದರು. ಮೊದಲು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಸಂಜೆ ಸುಮಾರು 4.30ರ ವೇಳೆಗೆ ಮುತ್ತತ್ತಿಗೆ ತೆರಳಿದ್ದರು. ಅಲ್ಲಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಕಾವೇರಿ ನದಿ ತೀರಕ್ಕೆ ಬಂದಿದ್ದಾರೆ.

ಸಂಜೆ ಸುಮಾರು 4.45ರ ವೇಳೆಗೆ ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದೆ ಎಂದು ಭಾವಿಸಿ ಫೋಟೋ ತೆಗೆಯಲು ಕೆಲವರು ನೀರಿಗೆ ಇಳಿದಿದ್ದಾರೆ. ಈ ವೇಳೆ ವಿಜಯಮ್ಮ ನೀರಿನಲ್ಲಿ ಮುಳುಗತೊಡಗಿದ್ದು, ಅವರನ್ನು ರಕ್ಷಿಸಲು ಮುಂದಾದ ಇತರರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಘಟನೆ ಗಮನಿಸಿದ ಸ್ಥಳೀಯರು ರವಿ ಹಾಗೂ ನಾಲ್ಕು ವರ್ಷದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕಾವೇರಿ ನದಿಯಲ್ಲಿ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ, ಅದನ್ನು ನಿರ್ಲಕ್ಷಿಸಿ ನೀರಿಗೆ ಇಳಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರ ಆಕ್ರಂದನಕ್ಕೆ ಕಾರಣವಾಗಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

error: Content is protected !!