
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಜಿಂಕೆಯ ಮೃತದೇಹವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ದೊಡ್ಡರಾಯಪ್ಪನಹಳ್ಳಿ ಗ್ರಾಮದ ರೈತ ಚನ್ನೇಗೌಡ, ನಂದಿಗಿರಿ ಶ್ರೇಣಿಯ ಬೆಟ್ಟಗಳಲ್ಲಿ ಸಾಕಷ್ಟು ಚಿರತೆ ಹಾಗೂ ಜಿಂಕೆಗಳು ವಾಸಿಸುತ್ತಿದ್ದು, ಈ ಹಿಂದೆ ಅವು ಗ್ರಾಮಗಳ ಕಡೆಗೆ ಬರುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ನಂದಿಗಿರಿ ಶ್ರೇಣಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಹಾಗೂ ಸ್ಪೋಟಕಗಳ ಬಳಕೆಯಿಂದ ಉಂಟಾಗುವ ಭಾರೀ ಶಬ್ದಕ್ಕೆ ಹೆದರಿ ಕಾಡುಪ್ರಾಣಿಗಳು ಗ್ರಾಮಗಳತ್ತ ಬರುತ್ತಿವೆ ಎಂದು ಆರೋಪಿಸಿದರು.
ಗ್ರಾಮಕ್ಕೆ ಬಂದ ಜಿಂಕೆಗಳು ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ರಸ್ತೆ ದಾಟಲು ಯತ್ನಿಸಿ ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಘಟನೆ ಕೂಡ ಅದೇ ಕಾರಣದಿಂದ ಸಂಭವಿಸಿರಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಕಲ್ಲು ಗಣಿಗಾರಿಕೆಯಲ್ಲಿ ಅತಿಯಾದ ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಸುವುದನ್ನು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಯಂತ್ರಿಸಿ, ವನ್ಯಜೀವಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.