ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ್ ಸುಣಗಾರ್ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ನಗರದಲ್ಲಿ ಶೀಘ್ರದಲ್ಲೇ ಹೈಟೆಕ್ ಮೀನುಗಾರರ ಮಾರುಕಟ್ಟೆ ಆರಂಭಿಸಲು ತೀರ್ಮಾನಿಸಲಾಗಿದ್ದು, ಜೊತೆಗೆ ಮೀನು ಹೋಟೆಲ್ ತೆರೆಯುವ ಯೋಜನೆಯೂ ರೂಪಿಸಲಾಗಿದೆ ಎಂದು ಹೇಳಿದರು.

ಮಳೆ ಕೊರತೆಯಿಂದಾಗಿ ಮೀನುಗಾರರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದು, ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಮೀನುಗಾರರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೈಗಾರಿಕೆಗಳಿಂದ ಹೊರಬರುವ ರಾಸಾಯನಿಕಯುಕ್ತ ನೀರು ಕೆರೆಗಳಿಗೆ ಸೇರಿ ನೀರು ಕಲುಷಿತವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರಿಂದ ಮೀನುಗಳು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ. ಮಹೇಶ್ ಕುಮಾರ್, ಮೀನುಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಮಂಜುನಾಥ್ ಸುಣಗಾರ್ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಮೀನುಗಾರರಿಗೆ ನೇರವಾಗಿ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸರ್ಕಾರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ನಗರಸಭಾ ಸದಸ್ಯ ಕಾಂತರಾಜ್ ಸೇರಿದಂತೆ ಮೀನುಗಾರರ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!