
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಹಾಗೂ ವಿನಯ್ ಗುರೂಜಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಟಿ.ಎ. ಶರವಣ, ವಿನಯ್ ಗುರೂಜಿ ಜೊತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತೀರ್ಥ-ಪ್ರಸಾದ ಸ್ವೀಕರಿಸಿದ ಅವರು, ದೇಗುಲದ ವತಿಯಿಂದ ಸ್ಮರಣಿಕೆ ಸ್ವೀಕರಿಸಿ ಗೌರವಿಸಲ್ಪಟ್ಟರು.
ಪೂಜೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಿ.ಎ. ಶರವಣ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರಿಗೆ ಸಮೃದ್ಧ ಬೆಳೆ ಬರಲಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಶೀಘ್ರ ಗುಣಮುಖರಾಗಲಿ, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಲಿ ಹಾಗೂ ರಾಜ್ಯ ಮತ್ತು ರಾಷ್ಟ್ರದ ಜನರ ಸೇವೆ ಮಾಡುವ ಶಕ್ತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.
ಜೊತೆಗೆ ಮುಂದಿನ ದಿನಗಳಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುವ ಶಕ್ತಿ ನೀಡುವಂತೆ ಪ್ರಾರ್ಥಿಸಿದ್ದಾಗಿ ತಿಳಿಸಿದರು.
ಇದೇ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಟಿ.ಎ. ಶರವಣ ತೀವ್ರ ವಾಗ್ದಾಳಿ ನಡೆಸಿದರು. ಶಾಸಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು “ಕಾಮಿಡಿ ಪೀಸ್” ಆಗದೆ “ಮಾಸ್ಟರ್ ಪೀಸ್” ಆಗಬೇಕು ಎಂದು ಹೇಳಿದ ಅವರು, ದೊಡ್ಡ ನಾಯಕರ ಬಗ್ಗೆ ಮಾತನಾಡುವ ಮುನ್ನ ಸಂಪೂರ್ಣ ಮಾಹಿತಿ ತಿಳಿದುಕೊಂಡು ಮಾತನಾಡುವುದು ಸೂಕ್ತ ಎಂದು ಸಲಹೆ ನೀಡಿದರು.
ಜನರ ಬಳಿ ಐದು ವರ್ಷಕ್ಕೊಮ್ಮೆ ಹೋಗಲೇಬೇಕು. ಆಗ ವ್ಯಕ್ತಿಯ ಸಂಸ್ಕಾರ ಮತ್ತು ವ್ಯಕ್ತಿತ್ವವನ್ನು ಜನ ಅಳೆಯುತ್ತಾರೆ. ಎಲ್ಲಿ ಸಂಸ್ಕಾರ ಇರುತ್ತದೆಯೋ ಅಲ್ಲಿ ನಮಸ್ಕಾರ ಇರುತ್ತದೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ಮೊದಲ ಬಾರಿಗೆ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜನರನ್ನು ಮೆಚ್ಚಿಸಲು ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡಬಾರದು. ಉತ್ತಮ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿರುವ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದು, ಶಾಸಕರಾಗಿ ಇನ್ನಷ್ಟು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಯನ್ನು ಪ್ರದೀಪ್ ಈಶ್ವರ್ ಅವರಿಂದ ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಲದೆ, ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ ಎಂದು ಜನ ಮಾತನಾಡುತ್ತಿದ್ದಾರೆ. ಪ್ರದೀಪ್ ಈಶ್ವರ್ ಅವರು ಎಚ್ಚರಿಕೆಯಿಂದ ಮಾತನಾಡುವುದು ಸೂಕ್ತ ಎಂದು ಟಿ.ಎ. ಶರವಣ ಹೇಳಿದರು.