ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಹಾಲು ಉತ್ಪಾದಕ ರೈತರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ವತಿಯಿಂದ ಗುರುವಾರ ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬಮೂಲ್ ನಿರ್ದೇಶಕ ಬಿ.ಸಿ. ಆನಂದ್, ರೈತರು ದೇಶದ ಬೆನ್ನೆಲುಬಾಗಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಸ್ವಂತ ಉದ್ಯೋಗ ಸೃಷ್ಟಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಹಿಂಡಿ, ಬೂಸ, ಮೇವು, ರಸಗೊಬ್ಬರ, ಪಶು ಆಹಾರ ಸೇರಿದಂತೆ ಕೃಷಿ ಮತ್ತು ಹೈನುಗಾರಿಕೆಗೆ ಅಗತ್ಯವಿರುವ ಎಲ್ಲಾ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಹಾಲಿನ ಖರೀದಿ ದರ ಮಾತ್ರ ಹಲವು ವರ್ಷಗಳಿಂದ ಹೆಚ್ಚಳವಾಗಿಲ್ಲ. ಇದರಿಂದ ಹೈನುಗಾರಿಕೆ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ಹಾಲು ಉತ್ಪಾದಕ ರೈತರು ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಹಸು ಸಾಕುವುದಕ್ಕಿಂತ ಹಸುವನ್ನು ಸಾಕಲು ರೈತನೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ಪಾದನಾ ವೆಚ್ಚ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರಿಕೆ ನಷ್ಟದ ಉದ್ಯಮವಾಗಿ ಪರಿಣಮಿಸಿದೆ. ಆದ್ದರಿಂದ ಸರ್ಕಾರ ಕೂಡಲೇ ಪ್ರತಿ ಲೀಟರ್‌ಗೆ ರೂ.10 ಖರೀದಿ ದರ ಹೆಚ್ಚಳದ ಜೊತೆಗೆ ಪ್ರೋತ್ಸಾಹಧನವನ್ನೂ ಹೆಚ್ಚಿಸಿ ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ವಿಶೇಷವಾಗಿ ರೈತರು ಮೂರು ಹಸುಗಳನ್ನು ಜಿಲ್ಲಾಡಳಿತ ಭವನದ ಆವರಣಕ್ಕೆ ಕರೆತಂದು ವಿನೂತನವಾಗಿ ತಮ್ಮ ಅಹವಾಲು ವ್ಯಕ್ತಪಡಿಸಿದರು.

ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರೈತರ ಪ್ರಮುಖ ಬೇಡಿಕೆಗಳು:

*ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ.೧೦ ಹೆಚ್ಚಿಸಬೇಕು.

*ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು.

*ಪಶು ಆಹಾರ, ಹಿಂಡಿ, ಬೂಸ ಮತ್ತು ಮೇವು ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

*ಬರ ಪರಿಸ್ಥಿತಿಯನ್ನು ಎದುರಿಸಲು ಹೈನುಗಾರರಿಗೆ ವಿಶೇಷ ನೆರವು ಘೋಷಿಸಬೇಕು.

*ಹೈನುಗಾರಿಕೆಯನ್ನು ಉಳಿಸಲು ಶಾಶ್ವತ ನೀತಿ ರೂಪಿಸಬೇಕು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಮುಖಂಡರಾದ ಹರೀಶ್‌ಗೌಡ, ರಂಗರಾಜು, ವಿವಿಧ ಸಂಘಟನೆಗಳ ಮುಖಂಡರು, ಹಾಲು ಉತ್ಪಾದಕ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!