
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು ಜಖಂಗೊಂಡಿದ್ದು, ಒಂದು ಟಾಟಾ ಏಸ್ ವಾಹನಕ್ಕೂ ಹಾನಿಯಾಗಿದೆ.

ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಚಾಕೊಲೇಟ್ ಸಾಗಿಸುತ್ತಿದ್ದ ಕ್ಯಾಂಟರ್, ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ನಿಯಂತ್ರಣ ತಪ್ಪಿ ರಸ್ತೆಬದಿಯ ಅಂಗಡಿಗಳಿಗೆ ನುಗ್ಗಿದೆ. ಬಳಿಕ ಕ್ಯಾಂಟರ್ ಸ್ಥಳದಲ್ಲೇ ಪಲ್ಟಿಯಾಗಿದೆ.

ಅಪಘಾತದ ಪರಿಣಾಮವಾಗಿ ಮೂರು-ನಾಲ್ಕು ಅಂಗಡಿಗಳು, ವಿದ್ಯುತ್ ಲೈಟ್ ಕಂಬ ಹಾಗೂ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ವಾಹನ ಜಖಂಗೊಂಡಿವೆ. ಘಟನೆಯ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.