ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತಿಪ್ಪಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರಕರಣದಲ್ಲಿ ಎರಡೂ ಕಡೆಯವರು ಪರಸ್ಪರ ಹಲ್ಲೆಯ ಆರೋಪ ಮಾಡಿದ್ದು, ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದೆ.

ಗ್ರಾಮದ ಮಮತಾ–ದಾಳಪ್ಪ ದಂಪತಿ ಸಾಕುತ್ತಿದ್ದ ಕೋಳಿಗಳು ನೆರೆಮನೆಯ ಅಶ್ವಥಪ್ಪ ಅವರ ಮನೆಯ ಮುಂದೆ ಗಲೀಜು ಮಾಡಿದ್ದನ್ನು ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದು ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಈ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಟ ನಡೆದಿದೆ.

ಈ ಘಟನೆಯಲ್ಲಿ ದಾಳಪ್ಪ ಹಾಗೂ ರವಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಸ್ಪತ್ರೆಗೆ ಬಂದ ಅಶ್ವಥಪ್ಪ ಹಾಗೂ ಅವರ ಬೆಂಬಲಿಗರು ಆಸ್ಪತ್ರೆಯಲ್ಲೇ ರವಿ ಮತ್ತು ಮಮತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಾಳಪ್ಪ ಕುಟುಂಬದವರು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, ಮೊದಲು ದಾಳಪ್ಪ ಹಾಗೂ ಅವರ ಕುಟುಂಬದವರು ಸೇರಿ 15ಕ್ಕೂ ಹೆಚ್ಚು ಮಂದಿ ಅಶ್ವಥಪ್ಪ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತಲೆಗೆ ಗಂಭೀರ ಗಾಯವಾಗಿದೆ ಎಂದು ಅಶ್ವಥಪ್ಪ ಕುಟುಂಬ ಆರೋಪಿಸಿದೆ. ಹಲ್ಲೆಯಿಂದ ಅಶ್ವಥಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೂ ಅವರ ಮೇಲೆ ಮತ್ತೊಮ್ಮೆ ಹಲ್ಲೆಗೆ ಯತ್ನ ನಡೆದಿದ್ದು, ಈ ವೇಳೆ ಎರಡೂ ಗುಂಪಿನವರ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಅಶ್ವಥಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗೆ ದೊಡ್ಡಬಳ್ಳಾಪುರದ ಮಾತೋಶ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆಗೆ ಉಂಟಾದ ಗಾಯಕ್ಕೆ ವೈದ್ಯರು ಒಂಬತ್ತು ಹೊಲಿಗೆ ಹಾಕಿದ್ದಾರೆ.

ಆಸ್ಪತ್ರೆಯಲ್ಲೇ ನಡೆದ ಗಲಾಟೆಯಿಂದ ರೋಗಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಗೌರಿಬಿದನೂರು ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕಡೆಯವರಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಘಟನೆಯ ನಿಖರ ಸತ್ಯಾಸತ್ಯತೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!