
ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ, ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ (ವಿಬಿ-ಜಿ ರಾಮ್ ಜಿ ಯೋಜನೆ) ತಾಲ್ಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಮೇಶ್ ಅವರು ತಿಳಿಸಿದರು.
ತಾಲ್ಲೂಕಿನ ಮತ್ತಿಘಟ್ಟ ಗ್ರಾಮ ಪಂಚಾಯಿತಿ ಬಸ್ ನಿಲ್ದಾಣದಲ್ಲಿ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಜಾಬ್ ಕಾರ್ಡ್ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ಎಂದು ಮಾಹಿತಿ ನೀಡಿದರು.
ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ಪ್ರಧಾನ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದರು.
ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ.
ಈ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರಮೇಶ್, ಕರವಸೂಲಿಕಾರ ಶ್ರೀಧರಾಚಾರ್, ತಾಂತ್ರಿಕ ಸಹಾಯಕರಾದ ವರುಣ್ ನಾಯ್ಕ ಪ್ರಕಾಶ್, ಇಒ ಚಂದ್ರು , ಬಿಎಫ್ ಟಿ ಶಶಿಕಲ, ಟಿಆರ್ ಎಂ ದುರ್ಗಮ್ಮ, ಪಂಚಾಯಿತಿ ಸಿಬ್ಬಂದಿ, ಸಂಜೀವಿನಿ ಸಂಘದ ಸದಸ್ಯರು, ಕಲಾವಿದರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.