ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ ಹಾಗೂ ಹೂವಿನ ಆರತಿಗಳ ಸೇವೆ ಅದ್ದೂರಿಯಾಗಿ ನಡೆಯಿತು.
ಶ್ರಾವಣ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ದೇವಾಲಯದಲ್ಲಿ ಬಸವಣ್ಣನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿವಿಧ ಬಗೆಯ ಹೂವುಗಳಿಂದ ದೇವಾಲಯವನ್ನು ಸಿಂಗರಿಸಿ, ಭಕ್ತರ ಸಮ್ಮುಖದಲ್ಲಿ ಹೂವಿನ ಆರತಿಗಳ ಸೇವೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಏಕಾಶಿಪುರ, ಗೆಜ್ಜಗದಹಳ್ಳಿ, ಅರಳುಮಲ್ಲಿಗೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಬಸವಣ್ಣನ ದರ್ಶನ ಪಡೆದರು. ಭಕ್ತರು ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ, ಆರತಿ ಸೇವೆಯಲ್ಲಿ ಭಾಗವಹಿಸಿದರು.
ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ದೇವಾಲಯದ ಆಡಳಿತ ಮಂಡಳಿ, ಗ್ರಾಮಸ್ಥರು ಹಾಗೂ ಭಕ್ತರು ಸಹಕಾರ ನೀಡಿದರು.
