
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.

ಮೇಲ್ಸೇತುವೆ ಮೇಲೆ ಅಳವಡಿಸಿರುವ ಕಬ್ಬಿಣದ ಕಂಬಿಗಳು ಮೇಲಕ್ಕೆ ಚಾಚಿಕೊಂಡಿದ್ದು, ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿವೆ. ವಿಶೇಷವಾಗಿ ರಾತ್ರಿ ವೇಳೆ ಕಂಬಿಗಳು ಸರಿಯಾಗಿ ಗೋಚರಿಸದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಸೇರಿದಂತೆ ವಾಹನ ಚಾಲಕರು ಅಪಘಾತಕ್ಕೊಳಗಾಗುವ ಆತಂಕ ಎದುರಾಗಿದೆ.

ಈ ಮಾರ್ಗದಲ್ಲಿ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಮೇಲ್ಸೇತುವೆಯಲ್ಲಿನ ಅವ್ಯವಸ್ಥೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಮೇಲಕ್ಕೆ ಚಾಚಿಕೊಂಡಿರುವ ಕಂಬಿಗಳನ್ನು ತೆರವುಗೊಳಿಸಿ ವಾಹನ ಸವಾರರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.