ಜಾರ್ಖಂಡ್ ನ ಸಣ್ಣ ಪಟ್ಟಣವಾದ ರಾಂಚಿಯಿಂದ ಬಂದು ಐಸಿಸಿ ಆಯೋಜಿಸುವ ಎಲ್ಲಾ ಮಾದರಿಯ ಟ್ರೋಫಿ ಗೆದ್ದು, ಕೋಟ್ಯಂತರ ಅಭಿಮಾನಿಗಳ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಪಡೆದು , ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ಇಡೀ ಕ್ರಿಕೆಟ್ ಜಗತ್ತು ಸಾಕ್ಷಿಯಾಗಿದೆ.
ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ನಂತರ ಅತ್ಯಂತ ಸಂಕಷ್ಟದಲ್ಲಿದ್ದ ಭಾರತ ತಂಡದ ನಾಯಕತ್ವ ವಹಿಸಿಕೊಂಡ ವಿಕೆಟ್ ಕೀಪರ್- ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ಅವರ ಆರಂಭಿಕ ದಿನಗಳು ಉತ್ತಮವಾಗಿರಲಿಲ್ಲ.
ಐಸಿಸಿ ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದ ಚೊಚ್ಚಲ ಟಿ-20 ವಿಶ್ವಕಪ್ ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ ಖ್ಯಾತಿ ಧೋನಿ ಅವರದು, ನಂತರ ತವರಿನಲ್ಲಿ ನಡೆದ 2011 ಐವತ್ತು ಓವರ್ ಗಳ ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಗೌತಮ್ ಗಂಭೀರ್ (97) ಮತ್ತು ನಾಯಕನಾಗಿ ಧೋನಿ (91) ರನ್ ಗಳಿಸುವ ಮೂಲಕ 28 ವಷ೯ಗಳ ಬಳಿಕ ಭಾರತಕ್ಕೆ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
2013 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ ಜಯಗಳಿಸಿ ಭಾರತಕ್ಕೆ ಟ್ರೋಫಿ ದೊರಕಿಸಿಕೊಟ್ಟರು. ನಾಯಕನಾಗಿ, ವಿಕೆಟ್ ಕೀಪರ್ ಆಗಿ, ಮ್ಯಾಚ್ ಫಿನಿಶರ್ ಹಾಗೂ ಮೆಂಟರ್ ಆಗಿರುವ ಧೋನಿ ಲಕ್ಷಾಂತರ ಯುವ ಆಟಗಾರರಿಗೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಸ್ಪೂರ್ತಿಯಾಗಿದ್ದಾರೆ.
2008 ರಿಂದ ಆರಂಭವಾಗಿರುವ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ ನಾಯಕನಾಗಿ 200 ಪಂದ್ಯಗಳು ಪೂರೈಸಿ ದಾಖಲೆ ಬರೆದಿದ್ದಾರೆ, 14 ಆವೃತ್ತಿಯ ಐಪಿಎಲ್ ನಲ್ಲಿ 11 ಬಾರಿ ಫೈನಲ್ ಪಂದ್ಯದಲ್ಲಿ ಆಡಿದ್ದು 5 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ಯಾಪ್ಟನ್ ಕೂಲ್ ಖ್ಯಾತಿ ಧೋನಿ ಅವರು ಪ್ಯಾರಾ ಮಿಲಿಟರಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ, ಭಾರತ ಸರ್ಕಾರದಿಂದ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ತಮಿಳುನಾಡು ಸಿಎಂ ಸ್ಟಾಲಿನ್, ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಹಭ೯ಜನ್ ಸಿಂಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವಾರು ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಜನ್ಮದಿನಾಚರಣೆಯ ಶುಭಾಶಯ ಕೋರಿದ್ದಾರೆ.