ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿವೆ. ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು ಬಾಕಿ ಉಳಿಸಿಕೊಳ್ಳಬಾರದು. ಇದಕ್ಕೆ ಟ್ರಾನ್ಸ್ಫಾರ್ಮರ್ ಗಳು ಇಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನು ಹೇಳಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಯುವುದು ಹಾಗೂ ವಿದ್ಯುದೀಕರಣದಲ್ಲಿ ಅನಗತ್ಯವಾಗಿ ವಿಳಂಬ ಮಾಡಬಾರದು. ಈ ವಿಳಂಬ ನೀತಿ ಅಪರಾಧ ಎಂದರು.
ನಗರ ಸ್ಥಳೀಯ ಸಂಸ್ಥೆಗಳ 1,200 ವಾರ್ಡುಗಳಲ್ಲಿ ಮೂರು ದಿನಕ್ಕಿಂತ ಹೆಚ್ಚು ಅವಧಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಿಗೆ 27 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವೆಡೆ ಬೋರ್ವೆಲ್ಗಳನ್ನು ಕೊರೆಯಲು, ದುರಸ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಚರಂಡಿ ನೀರಿನ ಪೈಪ್ ಲೈನ್, ಕುಡಿಯುವ ನೀರಿನ ಪೈಪ್ ಲೈನ್ ನೊಂದಿಗೆ ಸೇರುವ ಕಡೆಗಳಲ್ಲಿ ಪೈಪ್ ಲೈನ್ ಸ್ಥಳಾಂತರಗೊಳಿಸಬೇಕು. ಕಾಂಕ್ರೀಟ್ ರಸ್ತೆಗಳನ್ನು ಹಾಕುವ ಸಂದರ್ಭದಲ್ಲಿ ಯುಜಿಡಿ ಲೈನ್ ಹಾಗೂ ನೀರಿನ ಲೈನ್ ಗಳನ್ನು ಹಾಕುವ ಮುನ್ನ ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕೆಂದರು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬೆಳವಣಿಗೆಯಲ್ಲಿ ಇಳಿಕೆಯಾಗಿದೆ. ಕೆಲವು ಜಿಲ್ಲೆಯಲ್ಲಿ ಬೆಳವಣಿಗೆಯ ಪ್ರಮಾಣ ಶೇ5 ಕ್ಕಿಂತ ಕಡಿಮೆ ಇದೆ. ಇದನ್ನು ಸುಧಾರಿಸಲು ಕ್ರಮ ವಹಿಸಬೇಕು. ಆಸ್ತಿ ಮತ್ತು ವಾಣಿಜ್ಯ ಮುಗ್ಗಟ್ಟುಗಳ ತೆರಿಗೆಯನ್ನು ಯಾರೂ ಉಳಿಸಿಕೊಳ್ಳುವುದಿಲ್ಲ. ಕಟ್ಟದಿದ್ದವರಿಗೆ ನೋಟೀಸು ಕೊಟ್ಟು ಕಟ್ಟಲು ಕಾಲಮಿತಿ ನಿಗದಿ ಮಾಡಬೇಕು ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿ ಅಂಶಗಳಲ್ಲಿ ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿರುವುದು ಕಳವಳಕಾರಿ ಬೆಳವಣಿಗೆ. ಪ್ರತಿ ಮೂರು ತಿಂಗಳಿಗೊಮ್ಮೆ ಪಿಸಿ & ಪಿಎನ್ಡಿಟಿ ಕಾಯ್ದೆಯನ್ವಯ ಸ್ಕ್ಯಾನಿಂಗ್ ಕೇಂದ್ರಗಳ ತಪಾಸಣೆ ನಡೆಸಬೇಕು. ಗರ್ಭಿಣಿ ಮಹಿಳೆಯರ ದತ್ತಾಂಶದ ಮೇಲೆ ಜಿಲ್ಲಾಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದರು.
2015 ರಲ್ಲಿ ಉತ್ತಮ ಸೂಚ್ಯಂಕ ಹೊಂದಿದ್ದ ಕೆಲವು ಜಿಲ್ಲೆಗಳು 2022 ರಲ್ಲಿ ಕುಸಿತ ಕಂಡಿವೆ. ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಣ್ಣುಮಕ್ಕಳು ಹಾಗೂ ಮಹಿಳೆಯರಲ್ಲಿ ಅನೀಮಿಯಾ ಮತ್ತು ಅಪೌಷ್ಟಿಕತೆಯ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಆಸ್ಪತ್ರೆಗಳಲ್ಲಿಯೇ ಹೆರಿಗೆಯಾಗುವುದನ್ನು ಖಾತರಿಪಡಿಸಬೇಕು. ತಾಯಿ ಮರಣ ತಪಾಸಣೆಯನ್ನು (Death Audit) ಜಿಲ್ಲಾಧಿಕಾರಿಗಳು ನಿಯಮಿತವಾಗಿ ನಡೆಸಬೇಕು. ಲಸಿಕೆ ಕಾರ್ಯಕ್ರಮಗಳಲ್ಲಿಯೂ ಸಾಧನೆ ಉತ್ತಮಪಡಿಸಬೇಕು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಹಾಸ್ಟೆಲುಗಳಿಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸೂಚಿಸಲಾಯಿತು.
2,443 ಹಾಸ್ಟೆಲುಗಳಲ್ಲಿ ಕೇವಲ 981 ಹಾಸ್ಟೆಲುಗಳಿಗೆ ಮಾತ್ರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ 1462 ಹಾಸ್ಟೆಲುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದರು.
ಪ್ರತಿ ತಿಂಗಳು ಹಾಸ್ಟೆಲುಗಳಿಗೆ ದಿಢೀರ್ ಭೇಟಿ ಮಾಡಬೇಕು. ಇದರಿಂದ ಹಾಸ್ಟೆಲುಗಳ ಕುಂದುಕೊರತೆ, ಆಹಾರದ ಗುಣಮಟ್ಟ ಮತ್ತಿತರ ಸಮಸ್ಯೆಗಳು ಅರಿವಿಗೆ ಬರುತ್ತವೆ. ನಗರ ಸ್ಥಳೀಯ ಸಂಸ್ಥೆಗಳು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೀಟ್ ಪಂಪ್ಗಳನ್ನು ಒದಗಿಸಬೇಕು. ಹಾಸ್ಟೆಲುಗಳ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಸ್ಟೆಲುಗಳ ಕಟ್ಟಡ ನಿರ್ಮಾಣಕ್ಕಾಗಿ 120 ನಿವೇಶನಗಳನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಹಾಸ್ಟೆಲುಗಳಿಗೆ ತಡೆಗೋಡೆ ಆವರಣ ನಿರ್ಮಿಸಲು ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.