ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯವು ದೇಶದಲ್ಲೇ ಮೊದಲು ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎರಡು ವರ್ಷದ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಅಳವಡಿಸಿಕೊಂಡಿತ್ತು. ಆದರೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸದರಿ ಎನ್ಇಪಿ ರದ್ದು ಮಾಡಿ, ರಾಜ್ಯ ಶಿಕ್ಷಣ ನೀತಿ ರೂಪಿಸಲು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅದೇರೀತಿ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.